ಸುದ್ದಿ ಚಿಕ್ಕಮಗಳೂರು : ಬರ ಘೋಷಣೆಯಾಗಿರುವ ತಾಲ್ಲೂಕುಗಳಲ್ಲಿ ಫ್ರೂಟ್ಸ್ ಮೂಲಕ ರೈತರ ನೊಂದಣಿಯನ್ನು ಶೇ 95 ರಷ್ಟು ಮಾಡಬೇಕು ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಹೇಳಿದರು.
ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರಿಶೀಲನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಡೂರು, ಅಜ್ಜಂಪುರ, ಚಿಕ್ಕಮಗಳೂರು ತಾಲ್ಲೂಕುಗಳಲ್ಲಿ ರೈತರ ನೊಂದಣಿ ಶೇ 72 ರಷ್ಟು ಮಾತ್ರ ಆಗಿದ್ದು, ಉಳಿದಂತೆ ರೈತರ ನೊಂದಣಿಯಾಗದಿರುವುದು ಕಂಡು ಬಂದಿದೆ. ಆಯಾಯ ತಾಲ್ಲೂಕುಗಳ ತಹಸೀಲ್ದಾರರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಂಟಿ ಸಭೆ ನಡೆಸಿ. ಪ್ರತಿ ಹಳ್ಳಿಗಳ ಮನೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದು 20 ದಿನದೊಳಗೆ ಫ್ರೂಟ್ಸ್ ಐಡಿಯಲ್ಲಿ ನೊಂದಾಯಿಸದ ರೈತರನ್ನು ನೊಂದಾಯಿಸಲು ಕ್ರಮ ವಹಿಸಬೇಕು ಎಂದರು.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿರುವ ವಸತಿ ರಹಿತ, ಅರ್ಹ ಫಲಾನುಭವಿಗಳನ್ನು ಗುರುತಿಸಿ, ಮೇಲಾಧಿಕಾರಿಗಳಿಗೆ ತಿಳಿಸಿದ ಅವರು ಜಿಲ್ಲೆಯಲ್ಲಿ ಬರ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕುಡಿಯುವ ನೀರು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಎಲ್ಲಾ ತಾಲ್ಲೂಕುಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಇವುಗಳ ಮೇಲುಸ್ತುವಾರಿಯಲ್ಲಿ ಜನರಿಗೆ ಏನು ತೊಂದರೆಯಾಗದAತೆ ನಿಗಾ ವಹಿಸಬೇಕು ಎಂದ ಅವರು. ಈ ಬಾರಿಯ ಮಳೆ ಕೊರತೆಯಿಂದ ಹಿಂಗಾರು ಹಂಗಾಮು ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಎಲ್ಲ ರೀತಿಯ ಬೆಳೆಗಳು ಸೇರಿದಂತೆ ತೋಟಗಾರಿಕೆ ಬೆಳೆಗಳಿಂದ ಮಳೆ ಕೊರತೆಯಿಂದಾಗಿ ರೈತರಿಗೆ ನಷ್ಟವಾಗಿದ್ದು, ಬೆಳೆ ವಿಮೆ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರೈತರಿಗೆ ಮೇವಿನ ಕಿಟ್ಗಳನ್ನು ವಿತರಿಸಬೇಕು. ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ 20 ಲಕ್ಷ ರೂಗಳ ವರೆಗೆ ಶೇಕಡ 4ರ ಬಡ್ಡಿ ದರದಲ್ಲಿ ಸಹಾಯಧನದಲ್ಲಿ ಕೃಷಿ ಸಾಲ ವಿತರಿಸಲು ಸರ್ಕಾರ ನಿರ್ದೇಶನ ನೀಡಿದೆ ಎಂದು ಹೇಳಿದರು.
ಅಮೃತ್ ಮಹಲ್ ಕಾವಲು ಭೂಮಿ ವಿವಿಧಡೆ ಸುಮಾರು ಆರು ಸಾವಿರ ಎಕರೆ ಜಮೀನು ಹೊಂದಿದ್ದು. ಇದರಲ್ಲಿ ಕೆಲವು ಭಾಗ ಒತ್ತುವರಿಯಾಗಿದ್ದು, ನ್ಯಾಯಾಲಯದ ಹಂತದಲ್ಲಿ ಇರುವುದಾಗಿ ಅಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒತ್ತುವರಿ ಸಮಸ್ಯೆಗಳಿದ್ದು, ಅವುಗಳ ನಿವಾರಣೆಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಸರ್ಕಾರಿ ಜಮೀನನ್ನು ಉಳಿಸಿಕೊಳ್ಳುಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದ್ದು, ಕಂದಾಯ ಗ್ರಾಮಗಳನ್ನು ಗುರುತಿಸಲು ಎಲ್ಲ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ಸರ್ಕಾರಿ ನಿಯಮದಂತೆ ಹೊಸ ಸರ್ವೆ ನಂಬರ್ಗಳನ್ನು ನೀಡಿ ಪೋಡಿ ಮುಕ್ತ ಗ್ರಾಮಗಳನ್ನಾಗಿಸಲು ಕಂದಾಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಈ ರೀತಿಯ ಬಾಕಿ ಪ್ರಕರಣಗಳನ್ನು ತುರ್ತಾಗಿ ಬಗೆಹರಿಸಬೇಕು ಎಂದರು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು, ಹಾಸ್ಟೆಲ್, ಮತ್ತಿತರ ಕಟ್ಟಡಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಹಾಗೂ ಸರ್ಕಾರಿ ಜಾಗವನ್ನು ಉಳಿಸಿಕೊಳ್ಳಲು ಈಗಿನಿಂದಲೇ ವೈಜ್ಞಾನಿಕವಾಗಿ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಾಗಿದೆ. ಅಲ್ಲದೇ ಸಾಮಾನ್ಯ ಜನತೆ ಹೆಚ್ಚಾಗಿ ಸರ್ಕಾರಿ ಶಾಲೆ, ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಾರೆ. ಇವುಗಳನ್ನು ಉತ್ತಮವಾಗಿ ನೋಡಿಕೊಳ್ಳಬೇಕು ಮತ್ತು ಅವರಿಗೆ ಉತ್ತಮ ಸೇವೆ ನೀಡಬೇಕು. ಕಟ್ಟಡಗಳಿಗೆ ನಿವೇಶನ ಕೊರತೆಯಾಗದಂತೆ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸಬೇಕು ಎಂದ ಅವರು ಇ-ಸ್ವತ್ತು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸರ್ಕಾರ ಎಲ್ಲ ಸವಲತ್ತು ಕೊಟ್ಟಿದ್ದರು ನಿರೀಕ್ಷಿತ ಕೆಲಸಗಳು ಆಗುತ್ತಿಲ್ಲ ಎನ್ನುವ ದೂರುಗಳಿದ್ದು, ಅವುಗಳನ್ನು ದೂರ ಮಾಡಲು ಅವರವರ ಇಲಾಖೆಯ ಕಾರ್ಯ ಚಟುವಟಿಕೆಗಳನ್ನು ಅರಿತು ಉತ್ತಮ ಮನಸ್ಸಿನಿಂದ ಕರ್ತವ್ಯ ನಿರ್ವಹಿಸಬೇಕು. ಎಸ್ಎಸ್ಎಲ್ಸಿ ಯಲ್ಲಿ ಉತ್ತಮ ಫಲಿತಾಂಶ ಬರಲು ತಯಾರಿ ಮಾಡಿಕೊಳ್ಳಬೇಕು. ಸಾಂಕ್ರಾಮಿಕ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಭಾಗವಹಿಸಿದ್ದರು.